ADVERTISEMENT

ಅಭಿವೃದ್ಧಿ ಕಾಮಗಾರಿಗಳಿಗೆ ವಿದ್ಯುತ್‌ ದರ ಏರಿಕೆ ಅನಿವಾರ್ಯ: ವಿ. ಸುನೀಲ್‌ಕುಮಾರ್

​ಪ್ರಜಾವಾಣಿ ವಾರ್ತೆ
Published 21 ಜನವರಿ 2022, 14:48 IST
Last Updated 21 ಜನವರಿ 2022, 14:48 IST
ವಿ. ಸುನಿಲ್ ಕುಮಾರ್
ವಿ. ಸುನಿಲ್ ಕುಮಾರ್   

ಬೆಂಗಳೂರು: ‘ವಿದ್ಯುತ್‌ ಮಾರ್ಗಗಳ ಬದಲಾವಣೆ, ಹೊಸ ಉಪ ವಿಭಾಗಗಳ ಸ್ಥಾಪನೆಯಂತಹ ಅಭಿವೃದ್ಧಿ ಕಾಮಗಾರಿಗಳಿಂದಾಗಿ ವಿದ್ಯುತ್‌ ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ’ ಎಂದು ಇಂಧನ ಸಚಿವ ವಿ. ಸುನೀಲ್‌ಕುಮಾರ್ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಭಿವೃದ್ಧಿ ಕಾಮಗಾರಿಗಳಿಂದಾಗಿ ವಿದ್ಯುತ್‌ ಸರಬರಾಜು ಕಂಪನಿಗಳ (ಎಸ್ಕಾಂ) ಮೇಲೆ ಹೆಚ್ಚಿನ ಆರ್ಥಿಕ ಹೊರೆ ಬೀಳುತ್ತಿದೆ. ಅದನ್ನು ಸರಿದೂಗಿಸಲು ವಿದ್ಯುತ್‌ ದರ ಹೆಚ್ಚಳ ಮಾಡಲೇಬೇಕಾಗಿದೆ. ಆ ಮೂಲಕ ಆರ್ಥಿಕ ಹೊರೆಯನ್ನು ಗ್ರಾಹಕರ ಮೇಲೆ ವರ್ಗಾಯಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದರು.

‘ದರ ಏರಿಕೆಗೆ ಅವಕಾಶ ಕೋರಿ ವಿದ್ಯುತ್‌ ಸರಬರಾಜು ಕಂಪನಿಗಳು ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗಕ್ಕೆ ಅರ್ಜಿ ಸಲ್ಲಿಸಿವೆ. ಆಯೋಗವು ಒಪ್ಪಿಗೆ ನೀಡಿದರೆ ದರ ಪರಿಷ್ಕರಣೆ ಜಾರಿಗೆ ಬರುತ್ತದೆ’ ಎಂದು ತಿಳಿಸಿದರು.

ADVERTISEMENT

ಬಾಕಿ ವಸೂಲಿಗೆ ಕ್ರಮ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಬೆಂಗಳೂರು ಜಲಮಂಡಳಿ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಂದ ಎಸ್ಕಾಂಗಳಿಗೆ ₹ 12,000 ಕೋಟಿ ವಿದ್ಯುತ್‌ ಬಿಲ್‌ ಬಾಕಿ ಇದೆ. ಅದನ್ನು ವಸೂಲಿ ಮಾಡಲು ಇಲಾಖಾವಾರು ಸಭೆ ನಡೆಸಲಾಗಿದೆ. ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು’ ಎಂದು ಸಚಿವರು ಹೇಳಿದರು.

1,872 ಕಿರಿಯ ‘ಪವರ್‌ ಮ್ಯಾನ್‌’ ಮತ್ತು ಕಿರಿಯ ಪರಿಚಾರಕರ ಹುದ್ದೆಗಳ ಭರ್ತಿಗೆ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. 15 ದಿನಗಳಲ್ಲಿ ನೇಮಕಾತಿ ಆದೇಶ ನೀಡಲಾಗುವುದು ಎಂದರು.

ಸಾರಾಂಶ

‘ವಿದ್ಯುತ್‌ ಮಾರ್ಗಗಳ ಬದಲಾವಣೆ, ಹೊಸ ಉಪ ವಿಭಾಗಗಳ ಸ್ಥಾಪನೆಯಂತಹ ಅಭಿವೃದ್ಧಿ ಕಾಮಗಾರಿಗಳಿಂದಾಗಿ ವಿದ್ಯುತ್‌ ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ’ ಎಂದು ಇಂಧನ ಸಚಿವ ವಿ. ಸುನೀಲ್‌ಕುಮಾರ್ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.