ಬೆಳಗಾವಿ: ‘ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರು ಆದ್ಯತೆ ಕೊಡಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಸೂಚಿಸಿದರು.
ಯಮಕನಮರಡಿ ಮತ ಕ್ಷೇತ್ರದ ಹೊಸವಂಟಮುರಿ ಗ್ರಾಮದಲ್ಲಿ ₹ 1 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಸರ್ಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ 4 ಕೊಠಡಿಗಳು, ₹ 16 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಅಂಗನವಾಡಿ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.
‘ಪ್ರಸ್ತುತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅಗತ್ಯ. ಆದ್ದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗದಂತೆ ಕ್ಷೇತ್ರದ ಎಲ್ಲ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸಲಾಗಿದೆ. ಇನ್ನೂ ಏನಾದರೂ ಸಮಸ್ಯೆಗಳಿದ್ದರೆ ಅವುಗಳನ್ನೂ ಪರಿಹರಿಸಲಾಗುವುದು’ ಎಂದು ಭರವಸೆ ನೀಡಿದರು.
ಶಾಲೆಯ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರು.
ಮಾಜ ಕಲ್ಯಾಣ ಇಲಾಖೆ ವತಿಯಿಂದ ₹ 50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಅಂಬೇಡ್ಕರ್ ಭವನ ಉದ್ಘಾಟಿಸಿದರು. ಹೊಸ ವಂಟಮುರಿ ಗ್ರಾಮದಿಂದ ಇಸ್ಲಾಂಪುರದವರೆಗೆ ₹ 4 ಕೋಟಿ ಮೊತ್ತದಲ್ಲಿ ಕೈಗೊಂಡಿರುವ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.