ನವದೆಹಲಿ: ದಕ್ಷಿಣ ಭಾರತದಲ್ಲಿ ಸೋಮವಾರ ಮತ್ತು ಮಂಗಳವಾರ ಮಳೆ ಬಿಡುವು ನೀಡಲಿದ್ದು, ಬುಧವಾರದ ನಂತರ ಎರಡು ದಿನ ಮತ್ತೆ ತೀವ್ರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ, ಈಶಾನ್ಯ ಭಾರತ ಮತ್ತು ಮಧ್ಯ ಭಾರತದ ರಾಜ್ಯಗಳಲ್ಲಿ ಸೋಮವಾರ ಮತ್ತು ಮಂಗಳವಾರ ಭಾರಿ ಮಳೆಯಾಗಲಿದೆ. ಆದರೆ, ಬುಧವಾರದ ನಂತರ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬುಧವಾರ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು, ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶದ ದಕ್ಷಿಣದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಗುರುವಾರವೂ ಭಾರಿ ಮಳೆ ಮುಂದುವರಿಯಲಿದ್ದು, ಮಧ್ಯ ಕರ್ನಾಟಕಕ್ಕೂ ಮಳೆ ವಿಸ್ತರಿಸಲಿದೆ. ಶುಕ್ರವಾರ ಈ ಎಲ್ಲಾ ಪ್ರದೇಶಗಳಲ್ಲಿ ಮಳೆ ಮತ್ತಷ್ಟು ಬಿರುಸು ಪಡೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಉತ್ತರಾಖಂಡ, ಬಿಹಾರ, ಅಸ್ಸಾಂ, ಅರುಣಾಚಲ ಪ್ರದೇಶ, ಸಿಕ್ಕಿಂ, ಮೇಘಾಲಯಗಳಲ್ಲಿ ಮಂಗಳವಾರ ಮತ್ತು ಬುಧವಾರಕ್ಕೆ ಅನ್ವಯವಾಗುವಂತೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಗುರುವಾರದ ನಂತರ ಈ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಕಡಿಮೆಯಾಗಲಿದೆ.
ದಕ್ಷಿಣ ಭಾರತದಲ್ಲಿ ಸೋಮವಾರ ಮತ್ತು ಮಂಗಳವಾರ ಮಳೆ ಬಿಡುವು ನೀಡಲಿದ್ದು, ಬುಧವಾರದ ನಂತರ ಎರಡು ದಿನ ಮತ್ತೆ ತೀವ್ರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.